ರಾಜಕೀಯರಾಜ್ಯ

ಆಗಸ್ಟ್ 26 ರಂದು ಬಿಜೆಪಿ ವಿರುದ್ಧ ಕೊಡಗಿನಲ್ಲಿ ಹೋರಾಟಕ್ಕೆ ‘ಕೈ’ ಪ್ಲ್ಯಾನ್

ಬೆಂಗಳೂರು: ಅತಿವೃಷ್ಟಿ ಹಾನಿ ಪರಿಶೀಲನೆಗೆ ಕೊಡಗು ಪ್ರವಾಸ ಮಾಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಲು ಸಿದ್ಧತೆ ನಡೆಸಿದೆ.

ಈ ನಿಟ್ಟಿನಲ್ಲಿ ಆಗಸ್ಟ್ 26 ರಂದು ಕೊಡಗಿನಲ್ಲೇ ದೊಡ್ಡ ಮಟ್ಟದ ಹೋರಾಟ ರೂಪಿಸಲು ಸಿದ್ಧತೆ ಕೈಗೊಂಡಿದೆ. ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಗುರುವಾರ ಕೊಡಗು ಪ್ರವಾಸಕ್ಕೆ ತೆರಳಿದ್ದ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದಿದ್ದರು. ಶಿವಮೊಗ್ಗದಲ್ಲಿ ಸಾವರ್ಕರ್ ಭಾವಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕುವ ಉದ್ದೇಶ ಏನಿದೆ ಎಂದು ಪ್ರಶ್ನಿಸಿದ್ದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತರು ಕೊಡಗಿನಲ್ಲಿ ಸಿದ್ದರಾಮಯ್ಯ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಿಡಿಗೇಡಿಗಳು ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದರು.

ಈ ಘಟನೆಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ವಿರುದ್ಧ ಇದನ್ನು ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಲು ಸಿದ್ಧತೆ ಮಾಡುತ್ತಿದ್ದಾರೆ.

ಇದರ ಮುಂದುವರಿದ ಭಾಗವಾಗಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಹೇಳಿಕೆ ನೀಡಿದ್ದು,ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ.

ಬಿಜೆಪಿ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂದಿದ್ದಾರೆ.

ರಾಜಕೀಯವಾಗಿ ಕೊಡಗು ಬಿಜೆಪಿ ಭದ್ರಕೋಟೆಯಾಗಿದೆ. ಈ ಹಿಂದೆ ಟಿಪ್ಪು ಜಯಂತಿ ಆಚರಣೆ ವಿಚಾರವಾಗಿಯೂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಕೊಡಗಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಗಲಭೆ ನಡೆದು ಸಾವು-ನೋವುಗಳು ಸಂಭವಿಸಿದ್ದವು.

ಇದೀಗ ಮತ್ತೊಮ್ಮೆ ಸಿದ್ದರಾಮಯ್ಯ ವಿರುದ್ಧ ನೇರ ದಾಳಿ ನಡೆದಿದ್ದು, ಈ ನಿಟ್ಟಿನಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 26 ರಂದು ಕೊಡಗಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button