Uncategorized

ಕೋವಿಡ್ ನಿಯಂತ್ರಣ ಬಿಗಿಕ್ರಮ ಜಾರಿ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತೆ ಕೆಲವು ಕಠಿಣ ನಿರ್ಬಂಧಗಳನ್ನು ಜಾರಿ ಮಾಡಲು ಮುಂದಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳ ಸೋಂಕು ಪರಿಸ್ಥಿತಿಯ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದು, ಆ ವರದಿ ಆಧರಿಸಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಿದ್ದಾರೆ.

ರಾಜ್ಯದಲ್ಲಿ ಸೋಂಕು ಹೆಚ್ಚಾಗುತ್ತಿರುವುದು ತಮ್ಮ ಗಮನದಲ್ಲಿದೆ. ಎಲ್ಲಾ ಜಿಲ್ಲೆಗಳಲ್ಲಿ ಕೊರೊನಾ ಸ್ಥಿತಿಗತಿಯ ಬಗ್ಗೆ ಆಯಾ ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದು ಸಮಗ್ರ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ.

ಆ ವರದಿ ಬಂದ ನಂತರ ಒಂದೆರಡು ದಿನಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕೆಲ ತೀರ್ಮಾನಗಳನ್ನು ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದಕ್ಕೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಸೋಂಕು ನಿಯಂತ್ರಣಕ್ಕೆ ಎಲ್ಲ ಕ್ರಮಗಳನ್ನು ಕೈಗೊಂಡಿದ್ದೇವೆ. ಮುಂದೆ ಸಹ ಕೆಲವು ತೀರ್ಮಾನಗಳನ್ನು ಮಾಡುವುದಾಗಿ ಹೇಳಿದರು.

ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿತ್ತು. ಕೆಲ ದಿನಗಳಿಂದ ನಿಧಾನವಾಗಿ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ.

ಯಾವ ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳು ಹೆಚ್ಚಿವೆ. ಪ್ರತಿ ಜಿಲ್ಲೆಗಳ ಕೊರೊನಾ ಸ್ಥಿತಿಗತಿಯ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ನಂತರ ಸೋಂಕು ನಿಯಂತ್ರಣಕ್ಕೆ ಕೆಲ ತೀರ್ಮಾನಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದರು.

ಕೊರೊನಾ ಸೋಂಕಿನಿಂದ ಮೃತಪಟ್ಟ ಎಲ್ಲರಿಗೂ ಪರಿಹಾರ ನೀಡಲಾಗಿದೆ. ಪರಿಹಾರ ಸಿಗದ ಕೆಲ ವಿಶಿಷ್ಟ ಪ್ರಕರಣಗಳಿದ್ದರೆ ಅದನ್ನು ಗಂಭೀರವಾಗಿ ತೆಗೆದುಕೊಂಡು ಪರಿಹಾರ ದೊರಕಿಸುವ ಭರವಸೆಯನ್ನು ಅವರು ನೀಡಿದರು.

ಸೋಂಕು ಹೆಚ್ಚಾಗುತ್ತಿರುವುದಕ್ಕೆ ಯಾವುದೇ ಆತಂಕ ಬೇಡ. ನಿಯಂತ್ರಿಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.ಪರಿಹಾರ ಪ್ರಕಟರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ ಮೂವರಿಗೆ ತಲಾ ೫ ಲಕ್ಷ ರೂ.

ಪರಿಹಾರ ನೀಡುವುದಾಗಿ ಅವರು ಇದೇ ಸಂದರ್ಭದಲ್ಲಿ ಪ್ರಕಟಿಸಿದರು.ಈ ಕಲುಷಿತ ನೀರಿನಿಂದ ಮೂವರು ಸಾವನ್ನಪ್ಪಿರುವ ಬಗ್ಗೆ ಪೊಲೀಸ್ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದರು.

ಕಲುಷಿತ ನೀರಿನಿಂದ ಮೂವರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ರಾಯಚೂರಿನ ಎಲ್ಲ ವಾರ್ಡ್‌ಗಳಲ್ಲೂ ಕುಡಿಯುವ ನೀರಿನ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡುವಂತೆ ಸೂಚಿಸಿದ್ದೇನೆ.

ಕಲುಷಿತ ನೀರು ಕುಡಿಯುವ ನೀರಿಗೆ ಸೇರಲು ಕಾರಣ ಏನು, ಇದರಲ್ಲಿ ಅಧಿಕಾರಿಗಳಿಂದ ಲೋಪ ಆಗಿದೆಯೇ ಎಂಬೆಲ್ಲದರ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿಯೂ ಅವರು ತಿಳಿಸಿದರು.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button